ತುಂಗಭದ್ರಾ ಎಡದಂಡೆ ಕಾಲುವೆ ಒಡೆದ ಸ್ಥಳಕ್ಕೆ ಸಚಿವ ತಂಗಡಗಿ ಭೇಟಿ.

*ನಿರ್ಲಕ್ಷ್ಯಕ್ಕೆ ತೋರಿದವರನ್ನು ಸಸ್ಪೆಂಡ್ ಮಾಡಲು ಸೂಚನೆ
*ನಷ್ಟ ಹೊಂದಿದ ರೈತರಿಗೆ ಸೂಕ್ತ ಪರಿಹಾರದ ವ್ಯವಸ್ಥೆಗೆ ಸೂಚನೆ.
ಕಿಷ್ಕಿಂಧವಾಣಿ ಸುದ್ದಿ
ಗಂಗಾವತಿ: ಸಮೀಪದ ಬಸಾಪುರದ ಹತ್ತಿರ ತುಂಗಭದ್ರಾ ಎಡದಂಡೆ ಕಾಲುವೆ, ಒಡೆದ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ಎಸ್ ತಂಗಡಗಿ ಹಾಗೂ ಕೊಪ್ಪಳದ ಶಾಸಕ ಕೆ. ರಾಘವೇಂದ್ರ ಹಿಟ್ನಾಳ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಸುದ್ದಿಗಾರರೊಂದಿಗೆ ಮಾತನಾಡಿ ಬಸ್ಸಾಪುರ ಹತ್ತಿರ ಎಡದಂಡೆ ಕಾಲುವೆ ಸೋರಿಕೆ ಕಳೆದ ಒಂದು ತಿಂಗಳಿನಿಂದ ಆಗುತ್ತಿರುವ ಬಗ್ಗೆ ರೈತರು ಜಲಸಂಪನ್ಮೂಲ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರೂ ನಿರ್ಲಕ್ಷ್ಯ ತೋರಿರುವ ಕುರಿತು ರೈತರು ತಿಳಿಸಿದ್ದಾರೆ. ನಿರ್ಲಕ್ಷ ತೋರಿದ ನೀರಾವರಿ ಇಲಾಖೆಯ ಅಧಿಕಾರಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಂಡು ಸಸ್ಪೆಂಡ್ ಮಾಡಲಾಗುತ್ತದೆ. 15 ದಿನದೊಳಗೆ ಕಾಲುವೆಯನ್ನು ಸಂಪೂರ್ಣವಾಗಿ ದುರಸ್ತಿ ಮಾಡಿ ರಾಯಚೂರು ಹಾಗೂ ಕೊಪ್ಪಳ ಜಿಲ್ಲೆಯ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತದೆ. ನೀರು ನುಗ್ಗಿ ನಷ್ಟ ಅನುಭವಿಸಿರುವ ಬಸಾಪುರ,ಹರ್ಲಾಲಪುರ, ತಿರುಮಲಾಪುರ ರೈತರಿಗೆ ಸೂಕ್ತ ಪರಿಹಾರ ವಿತರಿಸುವ ವ್ಯವಸ್ಥೆ ಮಾಡಲಾಗುತ್ತದೆ. ಯಾವುದೇ ಕಾರಣಕ್ಕೂ ರೈತರ ಹಿತ ಮರೆಯಲು ಸಾಧ್ಯವಿಲ್ಲ ರೈತರಿಗೆ ನಮ್ಮ ಸರ್ಕಾರ ಸದಾ ನೆರವಾಗುತ್ತದೆ ಎಂದರು.
ಈ ಸಂದರ್ಭದಲ್ಲಿ ರೈತರು ಮತ್ತು ರೆಸಾರ್ಟ್ ಮಾಲೀಕರು ಸಚಿವರಿಗೆ ಸೂಕ್ತ ಪರಿಹಾರ ಒದಗಿಸುವಂತೆ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ರೆಡ್ಡಿ ಶ್ರೀನಿವಾಸ, ಜಿಲ್ಲಾಧಿಕಾರಿ ಡಾ. ಸುರೇಶ ಹಿಟ್ನಾಳ, ಎಸ್ಪಿ ಡಾ.ರಾಮ್ ಎಲ್ ಅರಸಿದ್ದಿ ಸೇರಿದಂತೆ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು ಸ್ಥಳೀಯ ರಾಜಕೀಯ ಮುಖಂಡರು ಇದ್ದರು.

